ನವದೆಹಲಿ, ಜುಲೈ 26: ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡ ಬಳಿಕವೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಶನಿವಾರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿ ಸ್ವೀಕರಿಸಿದ ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಸರಣಿ ಪರಿಶೀಲನಾ ಸಭೆ ನಡೆಸಿದ ಅವರು, ಸಚಿವಾಲಯದ ಕಾರ್ಯವಿಧಾನ, ಯೋಜನೆಗಳು ಹಾಗೂ ಪ್ರಮುಖ ವಿಷಯಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದರು.
“ಇದು ನನಗೆ ಹೊಸ ಜವಾಬ್ದಾರಿ. ಸಚಿವಾಲಯದ ಕಾರ್ಯವೈಖರಿ, ಯೋಜನೆಗಳು ಮತ್ತು ನಿರ್ಧಾರಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವುದು ನನ್ನ ಮೊದಲ ಆದ್ಯತೆ. ಎಲ್ಲ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಜನರಿಗೆ ಉತ್ತಮ ಫಲಿತಾಂಶ ನೀಡಲು ಕೆಲಸ ಮಾಡುತ್ತೇನೆ,” ಎಂದು ಜೋಶಿ ಸುದ್ದಿಗಾರರಿಗೆ ತಿಳಿಸಿದರು.ಅವರು ದಿನವಿಡೀ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವಾಲಯದ ವಿವಿಧ ವಿಭಾಗಗಳ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಜೋಶಿ, “ನಮ್ರತೆ ಮತ್ತು ಕರ್ತವ್ಯಭಾವದಿಂದ ಈ ಹೊಣೆಗಾರಿಕೆಯನ್ನು ನಿರ್ವಹಿಸುತ್ತೇನೆ” ಎಂದು ಹೇಳಿದರು.
ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಜೋಶಿ, ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತಂದಿರುವುದು ಸೇರಿದಂತೆ ಕಳೆದ ಕೆಲವು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಹತ್ವದ ಸುಧಾರಣೆಗಳು ನಡೆದಿವೆ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ, ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
