ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ. ಆಗಸ್ಟ್ 3ರಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಭೆ ನಡೆಯಲಿದೆ ಎನ್ನುವ ಮಾಹಿತಿ ಹಿನ್ನೆಲೆ, ರಾಜ್ಯ ಸರ್ಕಾರ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಆರಂಭಿಸಿದೆ.
ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಕಾನ್ಫರೆನ್ಸ್ ಹಾಲ್ಗೆ ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಸಭಾಂಗಣಕ್ಕೆ ಸುಣ್ಣ-ಬಣ್ಣ ಹಚ್ಚುವುದು, ಒಳಾಂಗಣ ಅಲಂಕಾರ, ಆಸನ ವ್ಯವಸ್ಥೆ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಮಟ್ಟದ ಸಭೆಗೆ ತಕ್ಕಂತೆ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗುತ್ತಿದೆ.
ಕಾವೇರಿ ನೀರಿನ ಹಂಚಿಕೆ ಕುರಿತಾಗಿ ಎರಡೂ ರಾಜ್ಯಗಳ ನಡುವೆ ಹಲವು ವರ್ಷಗಳಿಂದ ವಿವಾದ ಮುಂದುವರಿದಿರುವ ಸಂದರ್ಭದಲ್ಲಿ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ನೀರಿನ ಹಂಚಿಕೆ, ರಾಜ್ಯಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.
ಆದಾಗ್ಯೂ, ಆಗಸ್ಟ್ 3ರಂದು ಈ ಸಭೆ ನಡೆಯಲಿದೆ ಎಂಬ ಕುರಿತು ರಾಜ್ಯ ಸರ್ಕಾರದಿಂದ ಅಥವಾ ತಮಿಳುನಾಡು ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಧಿಕೃತ ಮಾಹಿತಿ ಹೊರಬರುವ ನಿರೀಕ್ಷೆಯಿದ್ದು, ರಾಜಕೀಯ ವಲಯದಲ್ಲಿ ಈ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.
